Local News: ನಾಗರಿಕರಾಗಿ ಬದುಕಲು ಮಾನವ ಹಕ್ಕುಗಳು ಅನಿವಾರ್ಯ : ನ್ಯಾ ಕೆ.ಎಂ.ಹರೀಶ್

Local News – ಪ್ರಜಾಪ್ರಭುತ್ವದ ಜೀವಂತಿಕೆ ಇರುವುದೇ ನಾಗರಿಕ ಸಮಾಜದ ಸ್ವತಂತ್ರ ಬದುಕಿನಿಂದ. ಹಾಗಾಗಿ ಸಂವಿಧಾನ ಹಾಗೂ ಕಾನೂನು ನೀಡಿರುವ ಮಾನವ ಹಕ್ಕುಗಳನ್ನು ಬೆಂಬಲಿಸಿ, ಬಾಳಬೇಕಿದೆ ಅದೇ ರೀತಿ ಜಾಗತಿಕ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ನ್ಯಾಯಸಮ್ಮತವಾದ, ಸುರಕ್ಷಿತವಾದ ಮತ್ತು ಉತ್ತಮ ಗುಣಮಟ್ಟದ ಉತ್ಪನ್ನಗಳು ಸಿಗಬೇಕು ಎಂಬ ಉದ್ದೇಶದಿಂದ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಧೀಶ ಕೆ.ಎಂ.ಹರೀಶ್ ತಿಳಿಸಿದರು.

Human rights day in Gudibande 2

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಹೋಬಳಿಯ ಗೆಗ್ಗಿಲರಾಳ್ಳಹಳ್ಳಿ ಬಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಮಂಗಳವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ, ಪ್ರತಿ ವರ್ಷವೂ ಒಂದೊಂದು ಧ್ಯೇಯದಂತೆ ಜಾಗತಿಕವಾಗಿ ಗ್ರಾಹಕರ ದಿನಾಚರಣೆ ಆಚರಿಸಲಾಗುತ್ತಿದೆ. ಗ್ರಾಹಕರ ಸುರಕ್ಷತೆ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸಬೇಕು.  ಮಾನವ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರಕ್ಕಾಗಿ ವಿಶ್ವ ಮಾನವ ಹಕ್ಕುಗಳ ದಿನವನ್ನು ಘೋಷಿಸಲಾಯಿತು. ಈ ದಿನದಂದು ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗೆಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಜೀವಿಸುವುದು, ವಾಕ್‌ ಸ್ವಾತಂತ್ರ್ಯ, ಆಹಾರ, ಶಿಕ್ಷಣ, ಸಾಮಾಜಿಕ ಭದ್ರತೆ, ಸಂಘಟನೆ, ರಾಷ್ಟ್ರೀಯತೆ, ರಕ್ಷಣೆ, ಆರೋಗ್ಯ, ಧಾರ್ಮಿಕ ಸ್ವಾತಂತ್ರ್ಯದ ಜತೆಗೆ ದೌರ್ಜನ್ಯದ ವಿರುದ್ಧ ದನಿ ಎತ್ತುವ ಹಕ್ಕುಗಳು ಮಾನವ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು.

ಗ್ರಾಹಕರು ಮಾರುಕಟ್ಟೆಯ ಮತ್ತು ರಾಷ್ಟ್ರದ ಆರ್ಥಿಕ ವ್ಯವಸ್ಥೆಯಲ್ಲಿ ಅತಿ ಪ್ರಮುಖರು. ಬಳಕೆದಾರರು ತಮ್ಮ ದಿನನಿತ್ಯದ ವ್ಯವಹಾರದಲ್ಲಿ ಅನೇಕ ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಮಾರುಕಟ್ಟೆ ಬೀಸುತ್ತಿರುವ ಬಲೆಯಲ್ಲಿ ಸಿಕ್ಕಿ ನಷ್ಟ, ನೋವು ಅನುಭವಿಸುತ್ತಿದ್ದಾರೆ. ಗ್ರಾಹಕರನ್ನು ರಕ್ಷಿಸಲು ಸಾಕಷ್ಟು ಕಾನೂನುಗಳು ರಚಿತವಾಗಿದ್ದರೂ. ಅದರ ಆಚರಣೆ ಸಮಪರ್ಕವಾಗಿಲ್ಲ. ಗ್ರಾಹಕರ ಯಾವುದೇ ಹಕ್ಕನ್ನು ಪರಿಗಣಿಸಿದರೂ ಇದು ಗೋಚರಿಸುತ್ತದೆ.

Human rights day in Gudibande 3

ನಂತರ ವಕೀಲರ ಸಂಘದ ಅಧ್ಯಕ್ಷ ರಮಾನಾಥ್ ರೆಡ್ಡಿ ಮಾತನಾಡಿ, ಸಾರ್ವಜನಿಕರಿಗೆ ಮೊದಲು ಕಾನೂನು ಅವಶ್ಯಕತೆ ಇರಬೇಕೆಂಬ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಿದ್ದು, ಗ್ರಾಹಕರಿಗಾಗಿ ಅನೇಕ ಕಾನೂನುಗಳನ್ನು ರೂಪಿಸಿದೆ, ಕೆಲ ಅಂಗಡಿಗಳಲ್ಲಿ ಗ್ರಾಹಕರಿಗೆ ಮೋಸ ಮಾಡುವುದು ಮಾಡಿದಾಗ ನಮಗೆ ಅಂತಹ ಸಮಯದಲ್ಲಿ ಕಾನೂನಿನ ಅರಿವು ಇದ್ದರೆ ಅವರನ್ನು ನಾವು ಪ್ರಶ್ನೆ ಮಾಡಬಹುದು ಜತೆಗೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಬಹುದು ಆದ್ದರಿಂದ ಪ್ರತಿಯೊಬ್ಬರು ಕಾನೂನಿನ ಅರಿವು ಪಡೆಯಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್, ವಸತಿನಿಲಯ ಪಾಲಕ ಮದು ಸುಧನ್ , ಎ ಇ ರವಣಪ್ಪ, ಬಿ.ಆರ್.ಸಿ ಭಾರತಿ, ವಸತಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಪೆರೇಸಂದ್ರ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಗದೀಶ್ ರೆಡ್ಡಿ, ಪೊಲೀಸ್ ಸಿಬ್ಬಂದಿ, ವಕೀಲರ ಸಂಘದ ಸದಸ್ಯರು ಸೇರಿ ಇತರರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

Scroll to Top