ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಗುಡಿಬಂಡೆ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ (Protest) ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಕಾರ್ಮಿಕ ಕಾಯ್ದೆಗಳ ರದ್ದತಿಗೆ ಒತ್ತಾಯ
ಈ ವೇಳೆ ಸಿಐಟಿಯು ಸಂಘಟನೆಯ ತಾಲೂಕು ಅಧ್ಯಕ್ಷೆ ಮಂಜುಳಾ ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕಾರ್ಮಿಕರ ಬದುಕು ಅತಂತ್ರ ಸ್ಥಿತಿಗೆ ತಲುಪಿದೆ. ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಕಾರ್ಮಿಕರ ಹಕ್ಕುಗಳು ದಿನದಿಂದ ದಿನಕ್ಕೆ ಕುಸಿಯುತ್ತಿವೆ ಎಂಬ ಆತಂಕ ಕಾರ್ಮಿಕರಲ್ಲಿ ಮನೆ ಮಾಡಿದೆ.
ಇತ್ತೀಚೆಗೆ ಜಾರಿಗೆ ತಂದಿರುವ ಹೊಸ ಕಾರ್ಮಿಕ ಕಾಯ್ದೆಗಳು ಕಾರ್ಮಿಕ ವಿರೋಧಿಯಾಗಿದ್ದು, ಅವುಗಳನ್ನು ಕೂಡಲೇ ರದ್ದುಪಡಿಸಬೇಕು. ಕನಿಷ್ಠ ವೇತನವನ್ನು ಖಚಿತವಾಗಿ ಜಾರಿಗೊಳಿಸಬೇಕು, ಅತಿಯಾದ ಕೆಲಸದ ಹೊರೆ ಕಡಿಮೆ ಮಾಡಬೇಕು, ಮಹಿಳಾ ಕಾರ್ಮಿಕರ ಸುರಕ್ಷತೆಗೆ ವಿಶೇಷ ಕ್ರಮ ಕೈಗೊಳ್ಳಬೇಕು ಹಾಗೂ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ (Protest) ಮಾಡುವ ನಿಯಮವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾರ್ಮಿಕರಿಗೆ ಉದ್ಯೋಗ ಭದ್ರತೆ ಇಲ್ಲ : ಭಾಗ್ಯಮ್ಮ
ಬಳಿಕ ಸಿಐಟಿಯು ಸಂಘಟನೆಯ ತಾಲೂಕು ಕಾರ್ಯದರ್ಶಿ ಭಾಗ್ಯಲಕ್ಷ್ಮೀ ಮಾತನಾಡಿ, ಸುಮಾರು ವರ್ಷಗಳಿಂದ ಕಡಿಮೆ ವೇತನಕ್ಕೆ ಅನೇಕ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲೂ ಬಿಸಿಯೂಟ ನೌಕರರು ಸೇರಿದಂತೆ ವಿವಿಧ ಯೋಜನೆಗಳಲ್ಲಿ ಕಾರ್ಮಿಕರು ಕಡಿಮೆ ಗೌರವಧನದಡಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಸಂಘಟನೆಯ ವತಿಯಿಂದ ಅವರಿಗೆ ಸೂಕ್ತ ವೇತನ, ಉದ್ಯೋಗ ಭದ್ರತೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುವಂತೆ ಪ್ರತಿಭಟನೆ ನಡೆಸಲಾಗಿತ್ತು. ಅವುಗಳನ್ನು ಈಡೇರಿಸದ (Protest) ಸರ್ಕಾರಗಳು ಇಂದು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತಂದು ಕಾರ್ಮಿಕರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ. ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ಶಾಶ್ವತ ಉದ್ಯೋಗ, ನಿವೃತ್ತಿ ವೇತನ ಅಥವಾ ಸಾಮಾಜಿಕ ಭದ್ರತೆ ಸಿಗುತ್ತಿಲ್ಲ. ಬಜೆಟ್ನಲ್ಲಿಯೂ ಕಾರ್ಮಿಕರಿಗೆ ಆದ್ಯತೆ ನೀಡಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರಮುಖ ಗಣ್ಯರು
ಈ ಪ್ರತಿಭಟನೆಯಲ್ಲಿ (Protest) ಸಿಪಿಎಂ ಪಕ್ಷದ ಮುಖಂಡರಾದ ಜಯರಾಮ ರೆಡ್ಡಿ, ವೆಂಕಟರಾಜು, ಆದಿನಾರಾಯಣ ಹಾಗೂ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ಪದ್ಮ, ಗೀತಾ, ಸುಜಾತ, ಗಂಗರಾಜು ಸೇರಿದಂತೆ ಹಲವರು ಇದ್ದರು.
