ರಾಜ್ಯದಲ್ಲಿ ಕೆಲವು ದಿನಗಳಿಂದ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ದುರ್ಬಳಕೆಯ ಪ್ರಕರಣ ಜೋರಾಗಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರ್ ಎಂಬುವವರು ಆತ್ಮಹತ್ಯೆ ಸಹ ಮಾಡಿಕೊಂಡಿದ್ದು, ಅವರು ಡೆತ್ ನೋಟ್ ನಲ್ಲಿ ಕೆಲವೊಂದು ವಿಚಾರಗಳನ್ನು ಬರೆದಿದ್ದರು. ಈ ಘಟನೆಯ ಹಿನ್ನೆಲೆಯಲ್ಲಿ ನೈತಿಕತೆಯಿದ್ದರೇ ಕೂಡಲೇ ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ನಗರದ ತಮ್ಮ ನಿವಾಸದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಅಹಿತಕರ ಘಟನೆಯಾಗಿದೆ. ಅವರು ಬರೆದ ಡೆತ್ ನೋಟ್ ನಲ್ಲಿ ತಮ್ಮ ಸಾವಿಗೆ ಕಾರಣರಾದವರ ಹೆಸರುಗಳನ್ನು ಬರೆದಿಟ್ಟಿದ್ದಾರೆ. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಡೆತ್ ನೋಟ್ ನಲ್ಲಿ ಹೆಸರು ಇರುವಂತಹ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಸಚಿವ ನಾಗೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಇನ್ನೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು ನೂರಕ್ಕೆ ನೂರು 20 ರಿಂದ 22 ಸ್ಥಾನಗಳನ್ನು ಗೆದ್ದೆ ಗೆಲ್ಲುತ್ತೇವೆ. ಇನ್ನೂ ಡಾ.ಧನಂಜಯ್ ಸರ್ಜಿ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅವರು ದೊಡ್ಡ ಅಂತರದಲ್ಲಿ ಗೆದ್ದೆಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲಾ ಕಡೆ ಅವರ ಪರವಾದ ಅಲೆಯೇ ಇದೆ. ವಾತವಾರಣ ಅನುಕೂಲರಕರವಾಗಿರುವುದರಿಂದ ವಿಧಾನ ಪರಿಷತ್ ನಲ್ಲೂ ಸಹ ಹೆಚ್ಚು ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದರಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ. ಇನ್ನೂ ಇದೇ ಸಮಯದಲ್ಲಿ ರಘುಪತಿ ಭಟ್ ಬಗ್ಗೆ ಮಾತನಾಡುವುದಿಲ್ಲ. ಅವರಿಗೆ ಎಲ್ಲಾ ಸ್ಥಾನಮಾನ ನೀಡಲಾಗಿತ್ತು ಆದರೂ ಹಠ ಮಾಡಿ ನಿಂತಿದ್ದಾರೆ. ಜನರು ಸೂಕ್ತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸ ನಮಗಿದೆ ಎಂದರು.