Govt Hospital – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲು ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹಣ ಪಡೆಯುತ್ತಿದ್ದಾರೆ ಎನ್ನಲಾದ ವಿಡಿಯೋ ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್ ಆದೇಶದ ಮೇರೆಗೆ ತನಿಖಾಅಧಿಕಾರಿ ಗುಡಿಬಂಡೆ ಆಸ್ಪತ್ರೆಗೆ ಬಂದು ತನಿಖೆ ನಡೆಸಿ ವರದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
Govt Hospital – ಶಸ್ತ್ರ ಚಿಕಿತ್ಸೆಗೆ ಹಣ ಪಡೆದ ವಿಡಿಯೋ
ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ವರ್ಷಗಳಿಗಿಂತಲೂ ಹೆಚ್ಚು ಕಾಲ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ನರಸಿಂಹಮೂರ್ತಿ ರವರು ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದಾರೆ. ಗೈನಕಾಲಜಿಸ್ಟ್ ಅಲ್ಲದೇ ಇದ್ದರೂ ಸಹ ಅವರು ಕಾನೂನು ಬಾಹಿರವಾಗಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು ಎಂಬ ಆರೋಪಗಳಿವೆ. ಕೆಲ ಬ್ರೋಕರ್ ಗಳಿಂದ ಹಣ ಪಡೆದು ಚಿಕಿತ್ಸೆ ಮಾಡುತ್ತಿದ್ದ ಎಂಬ ಆರೋಪವೂ ಸಹ ಇದೆ. ಕೆಲವು ದಿನಗಳ ಹಿಂದೆಯಷ್ಟೆ ಶಸ್ತ್ರ ಚಿಕಿತ್ಸೆ ಮಾಡಲು ಸಾರ್ವಜನಿಕ ಆಸ್ಪತ್ರೆಯಲ್ಲೇ ಹಣ ಪಡೆಯುತ್ತಿದ್ದ ವಿಡಿಯೋವನ್ನು ಸೆರೆಹಿಡಿದು ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು. ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿತ್ತು.
Govt Hospital – ತನಿಖೆಗೆ ಸೂಚನೆ
ಇನ್ನೂ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್ ತಮ್ಮ ಸಿಬ್ಬಂದಿಯನ್ನು ಕಳುಹಿಸಿ ವರದಿ ಕಳುಹಿಸುವಂತೆ ಸೂಚನೆ ನೀಡಿದ್ದರು. ಅದರಂತೆ ತನಿಖಾಧಿಕಾರಿ ಆಸ್ಪತ್ರೆಗೆ ಆಗಮಿಸಿ ತನಿಖೆ ಮಾಡಿದ್ದು, ವರದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ತಲುಪಿರುವುದಾಗಿ ಮಾಹಿತಿ ಬಂದಿದೆ. ಇದೇ ಸಮಯದಲ್ಲಿ ಕೆಲ ಸಾರ್ವಜನಿಕರು ಡಾ.ನರಸಿಂಹಮೂರ್ತಿ ರವರ ವಿರುದ್ದ ದೂರುಗಳನ್ನು ಸಹ ನೀಡಿದ್ದಾರೆ ಎನ್ನಲಾಗಿದೆ.
Govt Hospital – ಕಠಿಣ ಶಿಕ್ಷೆಗೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಉಪ್ಪಾರಹಳ್ಳಿ ಶ್ರೀನಿವಾಸ್ ಆಗ್ರಹ
ಇನ್ನೂ ಈ ಕುರಿತು ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಉಪ್ಪಾರಹಳ್ಳಿ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದು, ಅನೇಕ ವರ್ಷಗಳಿಂದ ಡಾ.ನರಸಿಂಹಮೂರ್ತಿ ಗುಡಿಬಂಡೆ ಸಾರ್ವಜನಿಕಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಇತ್ತಿಚಿಗೆ ತಾಲೂಕು ಆರೋಗ್ಯಾಧಿಕಾರಿಗಳಾಗಿ ಸಹ ಕೆಲಸ ಮಾಡುತ್ತಿದ್ದಾರೆ. ಅನೇಕ ವರ್ಷಗಳಿಂದ ಶಸ್ತ್ರಚಿಕಿತ್ಸೆ ಮಾಡುತ್ತಾ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಅನೇಕ ಭಾರಿ ಪ್ರತಿಭಟನೆಗಳನ್ನು ಮಾಡಿದ್ದೇವೆ. ಆದರೆ ಮೇಲಾಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಇದೀಗ ಲಂಚ ಪಡೆಯುವ ವಿಡಿಯೋ ಮಾದ್ಯಮಗಳಲ್ಲಿ ಪ್ರಚಾರವಾಗುತ್ತಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಕ್ತ ತನಿಖೆ ಮಾಡಿಅವರನ್ನು ಅಮಾನತ್ತು ಮಾಡಬೇಕು ಹಾಗೂ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದು ಅದನ್ನು ಸಹ ಸರ್ಕಾರ ಜಪ್ತಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಸಂಘಟನೆಯ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
Govt Hospital – ಸಮಗ್ರ ತನಿಖೆ ನಡೆಸಿ ಶಿಕ್ಷೆ ನೀಡಬೇಕು
ಇದೇ ವಿಚಾರವಾಗಿ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ದಪ್ಪರ್ತಿ ನಂಜುಂಡಪ್ಪ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತವಾಗಿ ದೊರೆಯಬೇಕು. ಇದೀಗ ತಾಲೂಕು ಆರೋಗ್ಯಾಧಿಕಾರಿಗಳು ಶಸ್ತ್ರಚಿಕಿತ್ಸೆ ಮಾಡಲು ರೋಗಿಗಳ ಕಡೆಯಿಂದ ಹಣ ಪಡೆಯುತ್ತಿದ್ದಾರೆ ಎಂದು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮಗ್ರವಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನಿನಂತೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.