Janaspandana : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ – ಶಾಸಕ ಸುಬ್ಬಾರೆಡ್ಡಿ ಭರವಸೆ…!

Janaspandana – ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಜನರ ಮನೆ ಬಾಗಿಲಿಗೆ ಸರ್ಕಾರವೇ ಬಂದು ಅವರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜನರು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

MLA Subbareddy inaugurates Janaspandana program to address local grievances at Ullodu village

Janaspandana – ಜನಸ್ಪಂದನಾ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಲು ಸಲಹೆ

“ಸರ್ಕಾರದಿಂದ ಅನೇಕ ಸೌಲಭ್ಯಗಳು ಲಭ್ಯವಿದ್ದರೂ, ಅವುಗಳನ್ನು ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅನೇಕ ಕೆಲಸಗಳು ಬಾಕಿ ಉಳಿಯುತ್ತಿವೆ. ಜನರು ತಮ್ಮ ಊರುಗಳಿಂದ ಕಚೇರಿಗಳಿಗೆ ಪದೇ ಪದೇ ಅಲೆಯಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಸಭೆ ಸಮಾರಂಭಗಳಲ್ಲಿ ಬ್ಯುಸಿಯಾಗಿದ್ದರಿಂದ ಜನರಿಗೆ ಸುಲಭವಾಗಿ ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಅರಿತುಕೊಂಡಿರುವ ಸರ್ಕಾರ, ಜನರಿಗೆ ಅನುಕೂಲವಾಗುವಂತೆ ಈ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Janaspandana –  ಜನರ ಸಮಸ್ಯೆಗಳ ತಕ್ಷಣದ ಪರಿಹಾರಕ್ಕೆ ಜನಸ್ಪಂದನಾ ವೇದಿಕೆ

ಶಾಸಕರು ಮುಂದುವರೆದು, “ಜನರು ಸಲ್ಲಿಸುವ ಬಹುತೇಕ ಅರ್ಜಿಗಳನ್ನು ಈ ಸಭೆಯಲ್ಲಿಯೇ ವಿಲೇವಾರಿ ಮಾಡಲಾಗುವುದು. ಆದ್ದರಿಂದ, ಸಾರ್ವಜನಿಕರು ಇಂತಹ ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

MLA Subbareddy inaugurates Janaspandana program to address local grievances at Ullodu village

ನುಡಿದಂತೆ ನಡೆಯುವ ಸರ್ಕಾರ: ಅಭಿವೃದ್ಧಿಗೆ ಬದ್ಧತೆ

“ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಚುನಾವಣೆಯ ಸಮಯದಲ್ಲಿ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡುತ್ತಿರುವುದರಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸ್ವಲ್ಪ ಅನುದಾನದ ಕೊರತೆಯಾಗಬಹುದು. ಆದರೂ ಸಹ, ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಲ್ಲೋಡು ಗ್ರಾ.ಪಂ ವ್ಯಾಪ್ತಿಯ ಮೂರು ಗ್ರಾಮಗಳನ್ನು ಹೊರತುಪಡಿಸಿ ಉಳಿದೆಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಜೂನ್ 30ರೊಳಗೆ ಉಳಿದ ಮೂರು ಗ್ರಾಮಗಳಿಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುವುದು” ಎಂದು ಅವರು ಭರವಸೆ ನೀಡಿದರು.

Janaspandana –  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಸೌಲಭ್ಯಗಳ ವಿತರಣೆ

ಜನಸ್ಪಂದನಾ ಕಾರ್ಯಕ್ರಮಕ್ಕೂ ಮುನ್ನಾ ಶಾಸಕರು ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನೂತನ ಪಶು ವೈದ್ಯಕೀಯ ಇಲಾಖೆಯ ಕಟ್ಟಡವನ್ನು ಉದ್ಘಾಟಿಸಿದರು. ನಂತರ, ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮೂರು ಕೊಠಡಿಗಳನ್ನು ಲೋಕಾರ್ಪಣೆ ಮಾಡಿದರು. ಅಲ್ಲದೆ, 5 ಕೋಟಿ ರೂಪಾಯಿ ವೆಚ್ಚದ ಗುಡಿಬಂಡೆ ಪಟ್ಟಣದಿಂದ ರಾಮಪಟ್ಟಣ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು. ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಸ್ಥಾಪಿಸಿದ್ದ ಮಾಹಿತಿ ಮಳಿಗೆಗಳನ್ನು ಸಹ ಅವರು ಉದ್ಘಾಟಿಸಿದರು.

MLA Subbareddy inaugurates Janaspandana program to address local grievances at Ullodu village

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿದ್ದ ಗಣ್ಯರು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು. ಬಳಿಕ, ವಿವಿಧ ಮಶಾಸನಗಳ ಮಂಜೂರಾತಿ ಪತ್ರಗಳು, ಭಾಗ್ಯ ಲಕ್ಷ್ಮೀ ಬಾಂಡ್ ವಿತರಣೆ, ಜಾಬ್ ಕಾರ್ಡ್ ವಿತರಣೆ, ಎನ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಣೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. Read this also : Aadhaar Card: ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆಯಾಗಿದೆಯೇ? ಈ ರೀತಿ ಪರೀಕ್ಷಿಸಿ….!

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸಿಗ್ಬತ್ತುಲ್ಲಾ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಅವರು ತಮ್ಮ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Scroll to Top