Lok Adalat – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಸವಿತಾ ರುದ್ರಗೌಡ ಚಿಕ್ಕನಗೌಡರ್ ತಿಳಿಸಿದರು.
Lok Adalat – ಏನಿದು ಲೋಕ ಅದಾಲತ್?
ಈ ಕುರಿತು ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜು. 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು. ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ತಾಲೂಕಿನ ಹಾಗೂ ನ್ಯಾಯಾಲಯ ವ್ಯಾಪ್ತಿಯ ಕಕ್ಷಿದಾರರು ಸದುಪಯೋಗ ಪಡೆದು ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬೇಕು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜು. 12 ರಂದು ನಿಗದಿಯಾಗಿರುವ ಲೋಕ ಅದಾಲತ್ ಮೂಲಕ ತಕ್ಷಣ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.
Lok Adalat – ಯಾವೆಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು?
ಇನ್ನೂ ರಾಜಿಯಾಗುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಲುವಾಗಿ ರಾಷ್ಟ್ರ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೂ ಅದಾಲತ್ ನಡೆಸಲಾಗುತ್ತಿದೆ. ಬ್ಯಾಂಕ್, ಅಪಘಾತ, ಸಣ್ಣಪುಟ್ಟ ಜಗಳ, ಜನನ ಪ್ರಮಾಣ ಪತ್ರ, ನಂತಹ ಪ್ರಕರಣಗಳು ಸೇರಿದಂತೆ ಕಕ್ಷಿದಾರರು ಇಚ್ಛಿಸಿದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಅವಕಾಶ ಇರುವ ಎಲ್ಲಾ ರೀತಿಯ ಪ್ರಕರಣಗಳನ್ನು ಅದಾಲತ್ ನಲ್ಲಿ ವಿಲೇವಾರಿ ಮಾಡಲಾಗುವುದು. ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದರು.
Read this also : PM Jeevan Jyoti Bima Yojana : ₹436ಕ್ಕೆ ನಿಮ್ಮ ಕುಟುಂಬಕ್ಕೆ 2 ಲಕ್ಷ ರೂ. ಸುರಕ್ಷೆ, ಅಗತ್ಯ ಮಾಹಿತಿ ಇಲ್ಲಿದೆ ನೋಡಿ…!
Lok Adalat – ಪೂರ್ವಭಾವಿ ಸಭೆಯಲ್ಲಿ ಗಣ್ಯರ ಉಪಸ್ಥಿತಿ
ಈ ಪೂರ್ವಭಾವಿ ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥರೆಡ್ಡಿ, ಆರಕ್ಷಕ ವೃತ್ತ ನಿರೀಕ್ಷಕ ನಯಾಜ್ ಬೇಗ್, ಸಬ್ ಇನ್ಸ್ ಪೆಕ್ಟರ್ ಗಣೇಶ್, ಜಗದೀಶರೆಡ್ಡಿ, ಗೌರಿಬಿದನೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮೇಶ್ ಗುಗ್ಗುರಿ, ಸಿಡಿಪಿಒ ರಫೀಕ್ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಹಾಜರಿದ್ದರು.