ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ನಿಟ್ಟಿನಲ್ಲಿ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪೋಷಕರು ಹಾಗೂ ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಅವರ ಅಭಿರುಚಿಯ ತಕ್ಕಂತೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕೆಂದು. ಜೊತೆಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತಹ ಜಡ್ಜ್ ಗಳು ನ್ಯಾಯಸಮ್ಮತವಾದ ತೀರ್ಪು ನೀಡಬೇಕು. ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಸಹ ನೀಡಲಿದ್ದು, ಇದು ನೇರವಾಗಿ ಮಕ್ಕಳ ಖಾತೆಗೆ ಜಮೆಯಾಗಲಿದೆ ಎಂದರು.
ಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸು ಉಲ್ಲಾಸಭರಿತವಾಗಿ ಕಲಿಕೆಯಲ್ಲಿ ಮುಂದುವರೆಯಲು ಸಾಧ್ಯ ಹಾಗೂ ಮಕ್ಕಳನ್ನು ಸರ್ವಾಂಗೀಣವಾಗಿ ಸಜ್ಜುಗೊಳಿಸುವ ಉದ್ದೇಶ ಪ್ರತಿಭಾ ಕಾರಂಜಿ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಲಿದ್ದಾರೆ. ಅವರ ಪ್ರತಿಭೆಯನ್ನು ಸ್ಪರ್ಧೆಗಳ ಜಡ್ಜ್ ಗಳು ಗುರ್ತಿಸಿ ನ್ಯಾಯ ಸಮ್ಮತವಾದ ತೀರ್ಪು ನೀಡಬೇಕು. ಆಗ ಮಾತ್ರ ಮಕ್ಕಳು ತಮ್ಮ ಪ್ರತಿಭೆಯನ್ನು ಜಿಲ್ಲಾ, ವಿಭಾಗ, ರಾಜ್ಯ ಮಟ್ಟದಲ್ಲೂ ಪ್ರದರ್ಶನ ಮಾಡಿ ಜಯಗಳಿಸಲು ಸಾಧ್ಯವಾಗುತ್ತದೆ ಎಂದರು.
ನಂತರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಗೌಡ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ವೇಳೆ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕೋಲಾಟ, ಏಕಪಾತ್ರ ಅಭಿನಯ, ಪ್ರಬಂಧ ಸ್ಪರ್ಧೆ, ಜಾನಪದ ಗೀತೆಗಳು, ಕ್ಲೇ ಮಾಡಲಿಂಗ್, ವಿವಿಧ ವೇಷ ಸ್ಪರ್ಧೆ, ಆಶುಭಾಷಣ, ರಂಗೋಲಿ, ಪ್ರಬಂಧ, ನೃತ್ಯ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಟಿಪಿಒ ಮುರಳಿ, ಇಸಿಒ ರಘು, ಕಸಾಪ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶ್ರೀರಾಮಪ್ಪ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಬಿ.ಆರ್.ಪಿಗಳು, ಸಿ.ಆರ್.ಪಿಗಳು ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.